ಬೆಂಗಳೂರಿನಲ್ಲಿ ಭಾರಿ ಮಳೆ ಕೆಆರ್‌ ಸರ್ಕಲ್‌ನ ಅಂಡರ್‌ಪಾಸ್‌ನಲ್ಲಿ ಸಿಲುಕಿ ಯುವತಿ ಸಾವು ಬೆಂಗಳೂರಿನಲ್ಲಿ ಇಂದು (ಭಾನುವಾರ) ಮಧಾಹ್ನ ಸುರಿದ ಭಾರೀ ಮಳೆಗೆ ಯುವತಿಯೊಬ್ಬಳು ಸಾವನ್ನಪ್ಪಿದ್ದಾಳೆ. ಆಂಧ್ರಪ್ರದೇಶದಿಂದ ರಾಜ್ಯಕ್ಕೆ ಪ್ರವಾಸಕ್ಕೆ ಬಂದಿದ್ದರು ಎಂದು ತಿಳಿದುಬಂದಿದೆ.ನಗರದಲ್ಲಿ ಮಧಾಹ್ನ 3 ಗಂಟೆ ಸುಮಾರಿಗೆ ಸುರಿದ ಆಲಿಕಲ್ಲು ಮಳೆಯಿಂದ ರಸ್ತೆ ತುಂಬೆಲ್ಲಾ ನೀರು ತುಂಬಿಕೊಂಡಿತ್ತು. ಕೆಆರ್‌ ವೃತ್ತದ ಬಳಿ ಇರುವ ಅಂಡರ್‌ಪಾಸ್‌ (ಕೆಳಸೇತುವೆ) ಸಂಪೂರ್ಣ ನೀರು ತುಂಬಿತ್ತು. ಆ ಮೂಲಕ ತೆರಳಿದ ಕಾರು ಮಳೆಗೆ ಮುಳುಗಡೆಯಾಗಿದ್ದು, ಆ ಕಾರಿನಲ್ಲಿದ್ದ ಕುಟುಂಬಸ್ಥರು ಸಿಲುಕಿಕೊಂಡಿರು. ಕೂಡಲೇ ಅಲ್ಲಿದ್ದ ಆಟೋ ಚಾಲಕರು ಗಮನಿಸಿ ರಕ್ಷಣೆಗೆ ಮುಂದಾಗಿದ್ದು, ಆ ಕಾರಿನಲ್ಲಿದ್ದ ಆರು ಜನರ ಪೈಕಿ ಒಬ್ಬಳು ಯುವತಿ ಸಾವಿಗೀಡಾಗಿದ್ದಾಳೆ.ಮೃತ ಯುವತಿ ಭಾನುರೇಖಾ (22) ಎಂದು ಗುರುತಿಸಲಾಗಿದೆ. ಶಾಲೆ, ಕಾಲೇಜುಗಳಿಗೆ ರಜೆ ಇರುವ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ 6 ಜನರ ಕುಟುಂಬ ಬೆಂಗಳೂರಿಗೆ ಪ್ರವಾಸಕ್ಕೆಂದು ಬಂದಿದ್ದರು ಎಂದು ಮೂಲಗಳು ತಿಳಿಸಿವೆ.ಯುವತಿ ಪ್ರಜ್ಞೆ ತಪ್ಪಿದ್ದಾಳೆ ಎಂದು ಆಕೆಯನ್ನು ಸಮೀಪದ ಸೆಂಟ್‌ ಮಾರ್ಥಾಸ್‌ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ, ಆಸ್ಪತ್ರೆಯಲ್ಲಿ ತ್ವರಿತವಾಗಿ ದಾಖಲಾತಿ ಮಾಡಿಕೊಂಡು ಚಿಕಿತ್ಸೆ ನೀಡಿಲ್ಲ ಎಂಬ ಆರೋಪವನ್ನು ಪೋಷಕರು ಹಾಗೂ ಸ್ಥಳೀಯ ಪ್ರತ್ಯಕ್ಷದರ್ಶಿಗಳು ಮಾಡಿದ್ದಾರೆ. ಈ ಬಗ್ಗೆ ಆಸ್ಪತ್ರೆಯಲ್ಲಿ ಗಲಾಟೆ ಮಾಡಿದ್ದಾರೆ.ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಅವರು, ಮೃತ ಮಹಿಳೆ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಡೆದ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಮಾತನಾಡಿದ ಅವರು, ”ಮಳೆಯಿಂದ ಸಂಕಷ್ಟಕ್ಕೆ ಸಿಲುಕಿ ಆಸ್ಪತ್ರೆ ಸೇರಿರುವವರ ಖರ್ಚನ್ನು ಸರ್ಕಾರವೇ ಭರಿಸಲಿದೆ” ಎಂದು ತಿಳಿಸಿದ್ದಾರೆ.”ನಾವು ಈಗಷ್ಟೇ ಅಧಿಕಾರಕ್ಕೆ ಬಂದಿದ್ದೇವೆ. ನಗರದಲ್ಲಿ ಕೆಲವು ಅವೈಜ್ಞಾನಿಕ ಅಂಡರ್ ಪಾಸ್‌ಗಳಿವೆ. ಅದನ್ನ ಸರಿಪಡಿಸುವ ಕೆಲಸ ಮಾಡುತ್ತೇವೆ. ಆಸ್ಪತ್ರೆಯಿಂದ ನಿರ್ಲಕ್ಷ್ಯ ಆಗಿದ್ದರೆ ಕ್ರಮ ತೆಗೆದುಕೊಳ್ಳುತ್ತೇವೆ. ಆದರೆ ರೋಗಿ ಆಸ್ಪತ್ರೆಗೆ ಬರುವಷ್ಟೊತ್ತಿಗೆ ಮೃತಪಟ್ಟಿದ್ದರು ಅಂತ ವೈದ್ಯರು ಹೇಳುತ್ತಿದ್ದಾರೆ. ಏನೇ ಆಗಿದ್ದರೂ ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದ್ದಾರೆ.ಕೆಆರ್‌ ವೃತ್ತದ ಅಂಡರ್‌ ಪಾಸ್‌ನಲ್ಲಿ ಸಾಕಷ್ಟು ನೀರು ತುಂಬಿ ಸಿಲಿಕಿದ್ದ ವಾಹನಗಳನ್ನು ಅಗ್ನಿ ಶಾಮಕ ಸಿಬ್ಬಂದಿ ಹೊರತೆಗಿದಿದ್ದಾರೆ. ಸದ್ಯ ನೀರನ್ನು ಸಹ ಮೋಟರ್‌ ಪಂಪ್‌ ಬಳಸಿ ಹೊರ ಹಾಕಲಾಗುತ್ತಿದೆ. ಸದ್ಯ ಅಂಡರ್‌ಪಾಸ್‌ ಬಳಸದಂತೆ ಸಂಚಾರಿ ಪೊಲೀಸರ್‌ ಸೂಚನೆ ನೀಡಿದ್ದಾರೆ.ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡಿ ಬಿಬಿ ಎಂಪಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ”ಬೆಂಗಳೂರು ನಗರದಲ್ಲಿ ಇಂದು ಸುರಿದ ಭಾರೀ ಮಳೆಯಿಂದ ಕೆ.ಆರ್.ವೃತ್ತದ ಅಂಡರ್ ಪಾಸ್ ನಲ್ಲಿ ಮಳೆನೀರಿಗೆ ಸಿಲುಕಿ ಇನ್ಫೋಸಿಸ್ ಉದ್ಯೋಗಿ ಭಾನುರೇಖಾ ಎಂಬ ಯುವತಿ ಸಾವನ್ನಪ್ಪಿರುವ ಸುದ್ದಿ ತಿಳಿದು ತೀವ್ರ ಆಘಾತವಾಯಿತು. ರಭಸ ಮಳೆಯ ಮುನ್ನೆಚ್ಚರಿಕೆ ಇದ್ದರೂ ಬಿಬಿಎಂಪಿ ಆಡಳಿತ ಎಚ್ಚೆತ್ತುಕೊಳ್ಳದೇ ಇರುವುದು ನಿರ್ಲಕ್ಷ್ಯದ ಪರಮಾವಧಿ” ಎಂದು ಕಿಡಿಕಾರಿದ್ದಾರೆ.”ಅಂಡರ್ ಪಾಸ್ ಗಳಲ್ಲಿ ಕಸಕಡ್ಡಿ ತೆಗೆದು ಸರಾಗವಾಗಿ ನೀರು ಹರಿದು ಹೋಗುವಂತೆ ಮಾಡಬೇಕಾಗಿದ್ದ ಪಾಲಿಕೆ, ಮೈಮರೆತು ಕರ್ತವ್ಯಲೋಪ ಎಸಗಿದೆ. ಪ್ರತೀಸಲವೂ ಮಳೆ ಬಂದಾಗ ಅವಾಂತರ, ಪ್ರಾಣಹಾನಿ ಸಂಭವಿಸಿದ ಮೇಲೆ ಪಾಲಿಕೆ ಎಚ್ಚೆತ್ತುಕೊಳ್ಳುತ್ತದೆ, ಯಾಕೆ? ಮಳೆ ಬಂದರೆ ಜನರು ಸಾಯಲೇಬೇಕೆ?” ಎಂದು ಪ್ರಶ್ನಿಸಿದ್ದಾರೆ.”ಭಾರೀ ಮಳೆ ಸುರಿಯುತ್ತಿದ್ದ ಅಪಾಯದ ಸಮಯದಲ್ಲಿ ವಾಹನ ಚಾಲಕರು ಅತ್ಯಂತ ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಬೇಕು. ಅಂಡರ್ ಪಾಸ್ ನಲ್ಲಿ ನೀರು ತುಂಬಿಕೊಂಡಿದ್ದನ್ನು ಕಂಡ ಮೇಲೂ ಚಾಲಕ ಕಾರನ್ನು ಅಂಡರ್ ಪಾಸ್ ಮೂಲಕ ಚಾಲನೆ ಮಾಡಬಾರದಿತ್ತು. ಸಂಚಾರಿ ಪೊಲೀಸರು ಮೊದಲೇ ಮುನ್ನೆಚ್ಚರಿಕೆ ನೀಡಬೇಕಿತ್ತು” ಎಂದಿದ್ದಾರೆ.ಬಿಬಿಎಂಪಿ ಅಧಿಕಾರಿಗಳು ಕೂಡಲೇ ನಗರದ ಉದ್ದಗಲಕ್ಕೂ ಎಲ್ಲಾ ಅಂಡರ್ ಪಾಸ್ ಗಳನ್ನು ವಿಸ್ತೃತವಾಗಿ ಪರಿಶೀಲಿಸಿ, ಕಸಕಡ್ಡಿ ವಿಲೇವಾರಿ ಮಾಡಿಸಿ ಮಳೆನೀರು ಸರಾಗವಾಗಿ ಹರಿದುಹೋಗುವಂತೆ ಮಾಡಬೇಕು. ಇನ್ನೊಂದು ಪ್ರಾಣನಷ್ಟವೂ ಆಗುವುದಕ್ಕೆ ಅವಕಾಶ ನೀಡಬಾರದು ಎಂದು ಎಚ್ಚರಿಸಿದ್ದಾರೆ.”ಮೃತ ನತದೃಷ್ಟ ಯುವತಿ ಕುಟುಂಬಕ್ಕೆ ಪರಿಹಾರ ನೀಡಿರುವುದು ಸ್ವಾಗತಾರ್ಹ. ಆದರೆ, ಇಂತಹ ದುರಂತಗಳು ಮರುಕಳಿಸದಂತೆ ರಾಜ್ಯ ಕಾಂಗ್ರೆಸ್ ನೇತೃತ್ವದ ಸರಕಾರ ಶಾಶ್ವತ ಪರಿಹಾರ ರೂಪಿಸಬೇಕು. ಅಂಡರ್ ಪಾಸ್, ರಸ್ತೆ, ಚರಂಡಿ, ಒಳಚರಂಡಿಗಳ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡಬೇಕು ಎನ್ನುವುದು ನನ್ನ ಆಗ್ರಹ” ಎಂದು ಟ್ವೀಟ್ ಎಚ್‌ಡಿಕೆ ಮಾಡಿದ್ದಾರೆ.

By tv46malenadu

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *