
ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ಮುಖ್ಯ ಅಧೀಕ್ಷಕ
ಅರೇಹಳ್ಳಿ: ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ಸಂದರ್ಭ ಉಂಟಾಗುವ ಸಮಸ್ಯೆಗಳನ್ನು ಮುಕ್ತವಾಗಿ ಹಂಚಿಕೊಂಡು ಅತ್ಯುತ್ತಮವಾಗಿ ಪರೀಕ್ಷೆಯನ್ನು ಎದುರಿಸಿ ಎಂದು ಅರೇಹಳ್ಳಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕ ಶಿವಕುಮಾರ್ ಎಸ್.ಎನ್. ಹೇಳಿದರು.
ಬೇಲೂರು ತಾಲೂಕು ಅರೇಹಳ್ಳಿಯ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ವಿದ್ಯಾರ್ಥಿಗಳಿಗೆ ಗುಲಾಬಿ ಹೂವನ್ನು ನೀಡುವುದರ ಮೂಲಕ ಆತ್ಮ ವಿಶ್ವಾಸ ತುಂಬಿ ಮಾತನಾಡಿದ ಅವರು, ಎಲ್ಲಾ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆಗಳಾಗದಂತೆ ಸ್ಥಳವನ್ನು ನಿಗದಿಪಡಿಸಲಾಗಿದೆ. ಬಿಸಿಲು ವಿಪರೀತವಾಗಿರುವ ಕಾರಣ ಕುಡಿಯುವ ನೀರನ್ನು ಪೂರೈಸಲಾಗುತ್ತದೆ. ವಿದ್ಯಾರ್ಥಿಗಳು ಪರೀಕ್ಷೆ ಬರೆಯುವಾಗ ಆಗುವ ಗಂಟೆಯ ಶಬ್ಧವನ್ನು ಆಲಿಸಿ ಸಮಯವನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಕಟ್ಟುನಿಟ್ಟಿನಲ್ಲಿ ಪರೀಕ್ಷೆ ನಡೆಯುವುದರಿಂದ ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಹೆದರದೇ ಆತ್ಮ ವಿಶ್ವಾಸದಿಂದ ಪರೀಕ್ಷೆಯನ್ನು ಎದುರಿಸಿ ಎಂದರು.
ಈ ವೇಳೆ ಇಸಿಒ ಶಿವಪ್ಪ, ಬಿಕ್ಕೋಡು ಸರಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಮಂಜುಳಾ ಸೇರಿದಂತೆ ಇನ್ನಿತರರು ಇದ್ದರು.




