
ಮಂಗಳೂರು : ಗ್ಯಾರಂಟಿ ಯೋಜನೆಯ ಅರ್ಜಿ ಸಲ್ಲಿಕೆಗೆ ಹಣ ಪಡೆದರೆ ಏಜೆನ್ಸಿಯನ್ನು ಬ್ಲಾಕ್ ಲಿಸ್ಟ್ಗೆ ಒಳಪಡಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ.ಗ್ಯಾರಂಟಿ ಯೋಜನೆಯ ಅರ್ಜಿ ಸಲ್ಲಿಕೆಯು ಸಂಪೂರ್ಣ ಉಚಿತವಾಗಿದೆ. ಯೋಜನೆಗೆ ಅರ್ಜಿದಾರರಿಂದ ಹಣ ಪಡೆದಲ್ಲಿ ಏಜೆನ್ಸಿಗಳನ್ನು ಬ್ಲಾಕ್ ಲಿಸ್ಟ್ಗೆ ಒಳಪಡಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ.ದಕ್ಷಿಣ ಕನ್ನಡ ಜಿ.ಪಂ. ನೇತ್ರಾವತಿ ಸಭಾಂಗಣದಲ್ಲಿ ಉಸ್ತುವಾರಿ ಸಚಿವರಾಗಿ ಅಧಿಕಾರ ಸ್ವೀಕರಿಸಿಕೊಂಡ ಬಳಿಕ ಇಂದು ನಡೆದ ಕೆಡಿಪಿ ಪ್ರಥಮ ತ್ರೈಮಾಸಿಕ ಸಮೀಕ್ಷಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ನೂತನ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮ ಒನ್ ಮೂಲಕ ಅರ್ಜಿ ಸ್ವೀಕರಿಸಲಾಗುತ್ತಿದೆ. ಅರ್ಜಿಯೊಂದಕ್ಕೆ ಸರ್ಕಾರವೇ 20 ರೂ. ಅನ್ನು ಗ್ರಾಮ ಒನ್ಗೆ ಪಾವತಿಸುತ್ತದೆ. ಆದರೆ ಅರ್ಜಿದಾರರಿಂದ 50 ರೂ. ಪಡೆಯಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಸಭೆಯಲ್ಲಿ ಆಕ್ಷೇಪಿಸಿದರು. ಈ ಹಿನ್ನೆಲೆಯಲ್ಲಿ ಸಚಿವರು ಈ ಎಚ್ಚರಿಕೆ ನೀಡಿದರು.
