
ತಿರುವನಂತಪುರ: ವಯನಾಡ್ ಜಿಲ್ಲೆಯ ಕಲ್ಲಾಡಿಯಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವಘಡದಲ್ಲಿ ಏಳು ಮಂದಿ ಗಾಯಗೊಂಡಿದ್ದರೆ, ಇತರ ಏಳು ಜನರು ನಾಪತ್ತೆಯಾಗಿದ್ದಾರೆ ಎಂದು ಕೇರಳಂ ಮುಖ್ಯಮಂತ್ರಿ ವಿ.ಡಿ. ಸತೀಶನ್ ತಿಳಿಸಿದ್ದಾರೆ.
ಕೋಝಿಕ್ಕೋಡ್ ಮತ್ತು ವಯನಾಡ್ ಜಿಲ್ಲೆಗಳನ್ನು ಸಂಪರ್ಕಿಸುವ ಸುರಂಗ ರಸ್ತೆ ಯೋಜನೆಯ ಕಾಮಗಾರಿ ನಡೆಯುತ್ತಿದ್ದ ಕಲ್ಲಾಡಿಯ ಮೀನಾಕ್ಷಿ ಸೇತುವೆಯ ಬಳಿ ಭೂಕುಸಿತ ಸಂಭವಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಭೂಕುಸಿತ ಪ್ರದೇಶದಲ್ಲಿ ಸಂಗ್ರಹವಾಗಿದ್ದ ಭಾರಿ ಪ್ರಮಾಣದ ಮಣ್ಣನ್ನು ತೆರವುಗೊಳಿಸುವಂತೆ ಲೋಕೋಪಯೋಗಿ ಸಚಿವ ಪಿ. ಕೆ. ಬಶೀರ್ ಮತ್ತು ಜಿಲ್ಲಾಧಿಕಾರಿಗಳು ಗುತ್ತಿಗೆದಾರರಿಗೆ ಮುಂಚಿತವಾಗಿಯೇ ಸೂಚಿಸಿದ್ದರು. ಆದಾಗ್ಯೂ, ಗುತ್ತಿಗೆದಾರರು ನಿರ್ದೇಶನಗಳನ್ನು ಪಾಲಿಸಲಿಲ್ಲ’ ಎಂದು ಸತೀಶನ್ ವಿವರಿಸಿದ್ದಾರೆ.
ಇದೊಂದು ದುರದೃಷ್ಟಕರ ಘಟನೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ’ ಎಂದು ಅವರು ತಿಳಿಸಿದ್ದಾರೆ.
ಸೂಕ್ತ ಹವಾಮಾನ ಮುನ್ಸೂಚನೆ ಅಥವಾ ಎಚ್ಚರಿಕೆ ನೀಡದಿರುವುದು ಭೂಕುಸಿತಕ್ಕೆ ಕಾರಣವಲ್ಲ. ಬದಲಿಗೆ ಅಧಿಕಾರಿಗಳು ಸೂಚಿಸಿದಂತೆ ಸಮಯಕ್ಕೆ ಸರಿಯಾಗಿ ಮಣ್ಣನ್ನು ತೆರವುಗೊಳಿಸದಿರುವುದೇ ಇದಕ್ಕೆ ಕಾರಣ ಎಂದಿದ್ದಾರೆ.
ರಕ್ಷಣಾ ಪಡೆಗಳು, ಪೊಲೀಸ್ ಹಾಗೂ ಅಗ್ನಿಶಾಮಕ ಸಿಬ್ಬಂದಿಯನ್ನು ಈಗಾಗಲೇ ಸ್ಥಳದಲ್ಲಿ ನಿಯೋಜಿಸಲಾಗಿದೆ. ಅಗತ್ಯ ಬಿದ್ದರೆ ಸ್ಥಳಕ್ಕೆ ನಿಯೋಜಿಸಲು ತ್ರಿಶೂರ್ನಲ್ಲಿ ರಕ್ಷಣಾ ಪಡೆಯನ್ನು ಸನ್ನದ್ದವಾಗಿಡಲಾಗಿದೆ ಎಂದೂ ಅವರು ಹೇಳಿದ್ದಾರೆ.
ಘಟನೆಗೂ ಮುನ್ನ ಆ ಪ್ರದೇಶದಲ್ಲಿ ಭಾರಿ ಮಳೆಯಾಗಿತ್ತು. ಸದ್ಯ ಮಳೆಯ ತೀವ್ರತೆ ಕಡಿಮೆಯಾಗಿದ್ದರೂ, ಇದು ರಕ್ಷಣಾ ಸಿಬ್ಬಂದಿಗೆ ತೊಂದರೆ ಉಂಟುಮಾಡುತ್ತಿದೆ ಎಂದು ತಿಳಿಸಿದ್ದಾರೆ.
