
ಬೇಲೂರು : ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರು ಯುವಕರ ನಡುವೆ ನಡೆದ ವಾಗ್ವಾದ ಚಾಕು ಇರಿತಕ್ಕೆ ತಿರುಗಿ ಓರ್ವ ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ.
ಗಾಯಗೊಂಡ ಯುವಕನನ್ನು ಶರತ್ (21) ಎಂದು ಗುರುತಿಸಲಾಗಿದ್ದು, ಹಲ್ಲೆ ನಡೆಸಿದ ಆರೋಪದ ಮೇಲೆ ಪ್ರಜ್ವಲ್ (22) ಎಂಬ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಶರತ್ ಸ್ಥಳೀಯ ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
ಮಾಹಿತಿಯ ಪ್ರಕಾರ, ಇಬ್ಬರೂ ಒಂದೇ ಯುವತಿಯನ್ನು ಪ್ರೀತಿಸುತ್ತಿದ್ದ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ಅವರ ನಡುವೆ ಆಗಾಗ ಮಾತಿನ ಚಕಮಕಿ ಮತ್ತು ಜಗಳಗಳು ನಡೆಯುತ್ತಿತ್ತು.
ಶನಿವಾರ ಬೆಳಿಗ್ಗೆ ಸುಮಾರು 10 ಗಂಟೆಗೆ ಶರತ್, ಪ್ರಜ್ವಲ್ನನ್ನು ಮಾತನಾಡಿಸಲು ಬಂದಿದ್ದ ವೇಳೆ ಮತ್ತೆ ವಾಗ್ವಾದ ಉಂಟಾಗಿದೆ. ಈ ವೇಳೆ ಕೋಪಗೊಂಡ ಪ್ರಜ್ವಲ್ ತನ್ನ ಬಳಿಯಿದ್ದ ಚಾಕುವಿನಿಂದ ಶರತ್ನ ಕುತ್ತಿಗೆ ಹಾಗೂ ಕೆನ್ನೆಯ ಭಾಗಕ್ಕೆ ಇರಿದಿದ್ದಾನೆ. ಪರಿಣಾಮ ಶರತ್ ಗಂಭೀರವಾಗಿ ಗಾಯಗೊಂಡಿದ್ದಾನೆ.
ಘಟನೆ ಕಂಡ ಸಾರ್ವಜನಿಕರು ಆರೋಪಿಯನ್ನು ಹಿಡಿಯಲು ಯತ್ನಿಸಿದ್ದಾರೆ. ಇದೇ ವೇಳೆ ಆ ಮಾರ್ಗವಾಗಿ ತೆರಳುತ್ತಿದ್ದ ಪಿಎಸ್ಐ ಎಸ್.ಜಿ. ಪಾಟೀಲ್ ಹಾಗೂ ದಫೇದಾರ್ ದೇವರಾಜು ಅವರು ತಕ್ಷಣ ಸ್ಥಳಕ್ಕೆ ಧಾವಿಸಿ ಗಾಯಾಳುವನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರಜ್ವಲ್ನನ್ನು ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
