
ಬೇಲೂರು/ಹಳೇಬೀಡು, ಜು.16: ಐತಿಹಾಸಿಕ ಹಳೇಬೀಡು ದ್ವಾರಸಮುದ್ರ ಕೆರೆ ಕೋಡಿ ಬಿದ್ದ ಹಿನ್ನೆಲೆಯಲ್ಲಿ ಶಾಸಕ ಎಚ್.ಕೆ. ಸುರೇಶ್ ಅವರು ಸಾಂಪ್ರದಾಯಿಕವಾಗಿ ಬಾಗಿನ ಅರ್ಪಿಸಿ, ಹೊಯ್ಸಳೇಶ್ವರ ಸ್ವಾಮಿ ಹಾಗೂ ಮಲ್ಲಿಕಾರ್ಜುನ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಅವರು, ರಾಜ್ಯ ಹಾಗೂ ದೇಶಾದ್ಯಂತ ಉತ್ತಮ ಮಳೆ-ಬೆಳೆ ಆಗಲೆಂದು ಪ್ರಾರ್ಥನೆ ಸಲ್ಲಿಸಿದ್ದು, ಕ್ಷೇತ್ರಕ್ಕೆ ಶಾಶ್ವತ ನೀರಿನ ಭದ್ರತೆ ಒದಗಿಸಲು ರಣಘಟ್ಟ ಯೋಜನೆಯನ್ನು ಶೀಘ್ರ ಪೂರ್ಣಗೊಳಿಸುವುದು ತಮ್ಮ ಪ್ರಮುಖ ಗುರಿಯಾಗಿದೆ ಎಂದು ತಿಳಿಸಿದರು. ರಣಘಟ್ಟ, ಎತ್ತಿನಹೊಳೆ ಹಾಗೂ ಆಲದಹಳ್ಳಿ ಲಿಫ್ಟ್ ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಿ ಕಾಮಗಾರಿಗಳಿಗೆ ವೇಗ ನೀಡಲಾಗಿದೆ ಎಂದರು.
ಪುಷ್ಪಗಿರಿ ಮಠದ ಶ್ರೀ ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಹಳೇಬೀಡು ಕೆರೆ ಕೋಡಿ ಬಿದ್ದಿರುವುದು ದೈವಾನುಗ್ರಹ ಹಾಗೂ ರೈತರು-ಸಾರ್ವಜನಿಕರು ನಡೆಸಿದ ದಶಕಗಳ ಹೋರಾಟದ ಫಲ ಎಂದು ಹೇಳಿದರು. ಅಡುಗೂರು ಗ್ರಾಮಕ್ಕೂ ಶೀಘ್ರ ನೀರು ತಲುಪುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಕಾರ್ಯಕ್ರಮದಲ್ಲಿ ಪುಷ್ಪಗಿರಿ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರು, ಗ್ರಾಮಸ್ಥರು ಹಾಗೂ ಮುಖಂಡರು ಭಾಗವಹಿಸಿದ್ದರು.
