
ಸಕಲೇಶಪುರ: ತಾಲ್ಲೂಕಿನ ಯಸಳೂರು, ಹೊಸೂರು ಹಾಗೂ ಉಚ್ಚಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜನತಾ ದಳ (ಎಸ್) ಪಕ್ಷದಿಂದ ನೇಮಕಗೊಂಡಿರುವ ಬಿ.ಎಲ್.ಎ.-2ರ ಸಭೆ ಮಾಜಿ ಸಚಿವ ಹೆಚ್.ಕೆ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆಯಿತು.
ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR – Special Intensive Revision) ಕಾರ್ಯವನ್ನು ಪರಿಣಾಮಕಾರಿಯಾಗಿ ನಡೆಸಲು ಈಗಾಗಲೇ ಕರ್ತವ್ಯ ನಿರ್ವಹಿಸುತ್ತಿರುವ ಬಿ.ಎಲ್.ಒ. ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಕೆಲಸ ಮಾಡಬೇಕು ಎಂದು ಸೂಚಿಸಿದರು.
ಕ್ಷೇತ್ರದ ಪ್ರತಿಯೊಬ್ಬ ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವಂತೆ ಅಗತ್ಯ ಸಹಕಾರ ನೀಡುವ ಜವಾಬ್ದಾರಿ ಬಿ.ಎಲ್.ಎ.-2ರ ಮೇಲಿದೆ ಎಂದು ತಿಳಿಸಿದರು.ವಿಧಾನಸಭಾ ಕ್ಷೇತ್ರದ ವತಿಯಿಂದ ನೇಮಕಗೊಂಡಿರುವ ಬಿ.ಎಲ್.ಎ. ಕಾಡಪ್ಪ ಅವರು ಮಾತನಾಡಿ, ಎಸ್.ಐ.ಆರ್. ಪ್ರಕ್ರಿಯೆಯ ಮಹತ್ವ, ಬಿ.ಎಲ್.ಎ.-2ರ ಕರ್ತವ್ಯಗಳು ಹಾಗೂ ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮಾಹಿತಿ ನೀಡಿದರು.
ಸಭೆಯಲ್ಲಿ ಭಾಗವಹಿಸಿದ್ದ ಎಲ್ಲಾ ಬಿ.ಎಲ್.ಎ.-2ರಿಗೆ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯವನ್ನು ಜವಾಬ್ದಾರಿಯುತವಾಗಿ ನಿರ್ವಹಿಸುವಂತೆ ಕರೆ ನೀಡಲಾಯಿತು.
ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರಾದ ಸುದರ್ಶನ್ ಹೆತ್ತೂರು, ಎಲ್.ಎಸ್. ತಮ್ಮೇಗೌಡ, ಟಿಎಪಿಎಂಸಿ ನಿರ್ದೇಶಕ ರಮೇಶ್ ಕರಗೂರು, ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರದೀಪ್ ಕೋವಳ್ಳಿ, ಉಚ್ಚಂಗಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ತಾರಾ ಹಾಗೂ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.


