
ಸಕಲೇಶಪುರ : ತಾಲ್ಲೂಕಿನ ಹಾನುಬಾಳುವಿನಲ್ಲಿ 172ನೇ ಶ್ರೀ ನಾರಾಯಣ ಗುರು ಜಯಂತಿಯನ್ನು ಅತ್ಯಂತ ಅದ್ದೂರಿಯಾಗಿ ಹಾಗೂ ಭಕ್ತಿಭಾವದಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಲೋಹಿತ್ ಪೂಜಾರಿ, ಬಿಲ್ಲವ ಸಂಘದ ಪದಾಧಿಕಾರಿಗಳು, ಶಾಸಕರಾದ ಸಿಮೆಂಟ್ ಮಂಜಣ್ಣ, ಹಿಂದೂ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ರಘು ಸಕಲೇಶಪುರ, ಸಕಲೇಶಪುರ ಬಿಲ್ಲವ ಸಂಘದ ಅಧ್ಯಕ್ಷ ಭಾಸ್ಕರ್ ರಕ್ಷಿದಿ, ಸಕಲೇಶಪುರ ತಾಲೂಕು ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ರಮೇಶ್ ಪೂಜಾರಿ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಿದ್ದರು.
ಹೊಂಕರಹಳ್ಳಿ ಸಂಘದ ಅಧ್ಯಕ್ಷ ಉಮ್ನಾಥ್ ಸುವರ್ಣ, ಲಯನ್ಸ್ ಕ್ಲಬ್ನ ಮಾಜಿ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ, ಲಿಂಗಾಪುರದ ಅಧ್ಯಕ್ಷ ಜಯಾನಂದ, ಕುಂಬಾರಡಿ ಬಿಲ್ಲವ ಸಂಘದ ಅಧ್ಯಕ್ಷರು ಹಾಗೂ ಹಾನುಬಾಳುವಿನ ಸಮಸ್ತ ನಾಗರಿಕ ಬಂಧುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಶ್ರೀ ನಾರಾಯಣ ಗುರುಗಳ “ಒಂದೇ ಜಾತಿ, ಒಂದೇ ಮತ, ಒಂದೇ ದೇವರು” ಎಂಬ ಮಹತ್ವದ ಸಂದೇಶ ಹಾಗೂ ತತ್ವಗಳನ್ನು ತಿಳಿಸಲಾಯಿತು. ಸಮಾಜದ ಪ್ರತಿಯೊಬ್ಬರೂ ವಿದ್ಯಾವಂತರಾಗಿ, ಸಂಘಟಿತರಾಗಿ, ಉತ್ತಮ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂಬ ನಾರಾಯಣ ಗುರುಗಳ ಸಂದೇಶವನ್ನು ಗಣ್ಯರು ಸ್ಮರಿಸಿದರು.
ಕಾರ್ಯಕ್ರಮಕ್ಕೆ ಆಗಮಿಸಿದ್ದ ವಿವಿಧ ಸಂಘಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು. ನಂತರ ಬಿಲ್ಲವ ಬಾಂಧವರು ಹಾಗೂ ಸಾರ್ವಜನಿಕರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.
ಹಾನುಬಾಳುವಿನ ಸಮಸ್ತ ನಾಗರಿಕರ ಸಹಕಾರದೊಂದಿಗೆ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.









