
ಕಾಂಗ್ರೆಸ್ನಲ್ಲಿದ್ದಾಗ 3 ಬಾರಿ ಗೆದ್ದಿದ್ದೆ, ಬಿಜೆಪಿ ಸೇರಿ 2 ಬಾರಿಯೂ ಸೋತಿದ್ದೇನೆ ಎಂದು ಬಿಜೆಪಿಯ ಮಾಜಿ ಸಚಿವ ಎಂಟಿಬಿ ನಾಗರಾಜ್ ಬೇಸರ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಭಾನುವಾರ ನಡೆದ ಸೋತ ಬಿಜೆಪಿ ಅಭ್ಯರ್ಥಿಗಳ ಆತ್ಮಾವಲೋಕನ ಸಭೆಯಲ್ಲಿ ಮಾತನಾಡಿದ ಅವರು, “ನನ್ನ ಸೋಲಿಗೆ ತಮ್ಮದೇ ಪಕ್ಷದ ಮಾಜಿ ಸಚಿವ ಡಾ. ಕೆ ಸುಧಾಕರ್ ನೇರ ಕಾರಣ. ಡಾ. ಕೆ ಸುಧಾಕರ್ಗೆ ಬೆಂಗಳೂರು ಗ್ರಾಮಾಂತರ ಉಸ್ತುವಾರಿ ನೀಡಿದ್ದರು. ಉಸ್ತುವಾರಿ ಸ್ಥಾನವನ್ನು ಅವರು ಸಮರ್ಥವಾಗಿ ನಿಭಾಯಿಸಲಿಲ್ಲ. ವಿಧಾನಸಭಾ ಚುನಾವಣೆಯಲ್ಲಿ ಆತನೂ ಸೋತ, ನಮ್ಮನ್ನೂ ಸೋಲಿಸಿದ” ಎಂದು ಹತಾಶೆ ವ್ಯಕ್ತಪಡಿಸಿದರು.
ನನ್ನ ಹಾಗೂ ಚಿಂತಾಮಣಿ ಬಿಜೆಪಿ ಅಭ್ಯರ್ಥಿ ಸೋಲಿಗೆ ಡಾ. ಕೆ ಸುಧಾಕರ್ ಕಾರಣ. ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರನ್ನು ಸಚಿವರು ಗಣನೆಗೆ ತೆಗೆದುಕೊಳ್ಳಲಿಲ್ಲ. ಕಾರ್ಯಕರ್ತರ ಆಗುಹೋಗುಗಳನ್ನು ಉಸ್ತುವಾರಿ ಸಚಿವರು ಕೇಳಲೇ ಇಲ್ಲ. ಸುಧಾಕರ್ನಿಂದಾಗಿಯೇ ನಾನು ಸೋತಿದ್ದು” ಎಂದು ಅವರು ದೂರಿದ್ದಾರೆ.
ಕಾಂಗ್ರೆಸ್ನಲ್ಲಿ ಇದ್ದಾಗ ಮೂರು ಬಾರಿ ಗೆದ್ದಿದ್ದೆ. ಆದರೆ, ಬಿಜೆಪಿಗೆ ಬಂದು ಎರಡು ಬಾರಿ ಸೋತಿದ್ದೇನೆ. ಬಿ.ಎಸ್ ಯಡಿಯೂರಪ್ಪ ಅವರ ಮಾತಿಗೆ ಗೌರವ ನೀಡಿ ನಾನು ಬಿಜೆಪಿ ಸೇರಿದ್ದೆ. ಬಿಜೆಪಿ ಸೇರಿದ ನಂತರ ಎರಡು ಬಾರಿ ಸ್ಪರ್ಧಿಸಿ ಎರಡು ಬಾರಿಯೂ ಸೋತಿದ್ದೇನೆ ಎಂದು ಅವರು ಹೇಳಿದರು.
ನಾನು ಹಣ, ಅಧಿಕಾರದ ಆಸೆಗಾಗಿ ಬಿಜೆಪಿಗೆ ಬಂದವನಲ್ಲ. ಆದರೆ ನಮ್ಮ ಪಕ್ಷ 40 ಪರ್ಸೆಂಟ್ ಕಮಿಷನ್ ಆರೋಪಕ್ಕೆ ಸರಿಯಾಗಿ ಕೌಂಟರ್ ಅಟ್ಯಾಕ್ ಮಾಡಲಿಲ್ಲ. ಬದಲಾಗಿ ನಾವು ಕೇವಲ ಸಿದ್ದರಾಮಯ್ಯಗೆ ಮಾತ್ರ ಬೈಯುತ್ತಾ ಕುಳಿತೆವು. ಅದೇ ರೀತಿ ಚುನಾವಣೆಯ ವೇಳೆ ನಮ್ಮ ಸರ್ಕಾರ ಅಕ್ಕಿ ವಿತರಣೆ ಕಡಿಮೆ ಮಾಡಿದ್ದು, ಅದೇ ಸಂದರ್ಭಕ್ಕೆ ಕಾಂಗ್ರೆಸ್ನ 10 ಕೆಜಿ ಅಕ್ಕಿ ಗ್ಯಾರಂಟಿಯೂ ನಮ್ಮ ಸೋಲಿಗೆ ಕಾರಣವಾಯ್ತು ಎಂದು ಆತ್ಮಾವಲೋಕನ ಮಾಡಿಕೊಂಡಿದ್ದಾರೆ.
ಎಂಟಿಬಿ ನಾಗರಾಜ್ರವರು 2004 ರಲ್ಲಿ ಹೊಸಕೋಟೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಕಂಡಿದ್ದರು. ಆದರೆ 2008 ರಲ್ಲಿ ಸೋಲು ಅನಭವಿಸಿದ್ದರು. ತದನಂತರ 2013 ಮತ್ತು 2018 ರಲ್ಲಿ ಸತತ ಗೆಲುವು ದಾಖಲಿಸಿದ್ದರು. ಆದರೆ 2019ರಲ್ಲಿ ಮಂತ್ರಿಯಾಗಿದ್ದರೂ ಸಹ ಕಾಂಗ್ರೆಸ್ ಪಕ್ಷ ತ್ಯಜಿಸಿ ಬಿಜೆಪಿಯ ಆಪರೇಷನ್ ಕಮಲದ ಬಲೆಗೆ ಬಿದ್ದರು. ತದನಂತರ ನಡೆದ ಉಪಚುನಾವಣೆಯಲ್ಲಿ ಮತ್ತು ಇತ್ತೀಚಿಗಿನ ವಿಧಾನಸಭಾ ಚುನಾವಣೆಯಲ್ಲಿ ಶರತ್ ಬಚ್ಚೇಗೌಡರ ಎದುರು ಸೋಲು ಕಂಡಿದ್ದಾರೆ.
ಮಾಜಿ ಸಚಿವ ವಿ ಸೋಮಣ್ಣ ಕೂಡ ಸೋಲಿಗೆ ಬೇಸರ ವ್ಯಕ್ತಪಡಿಸಿದ್ದಾರೆ. “ನಾನು ಮನೆಯಲ್ಲಿ ಆರಾಮಾಗಿ ಮಲಗಿದ್ದರೂ ಗೋವಿಂದರಾಜನಗರದಲ್ಲಿ ಗೆಲ್ಲುತ್ತಿದ್ದೆ. ಆದರೆ ಪಕ್ಷ ನೀಡಿದ ಟಾಸ್ಕ್ ಪೂರೈಸಲು ಕ್ಷೇತ್ರ ಬಿಟ್ಟು ಹೋದೆ. ವರುಣಾ ಮತ್ತು ಚಾಮರಾಜನಗರ ಕ್ಷೇತ್ರದಲ್ಲಿ ಸ್ಪರ್ಧಿಸಿ, ಈಗ ಸೋತು ನಿರುದ್ಯೋಗಿ ಆಗಿ ಮನೆಯಲ್ಲಿ ಕುಳಿತಿದ್ದೇನೆ” ಎಂದಿದ್ದಾರೆ.
