
ರಾಷ್ಟ್ರೀಯ ವನ ಮಹೋತ್ಸವ ಸಪ್ತಾಹದ ಅಂಗವಾಗಿ ಯಸಳೂರು ವಲಯ ಅರಣ್ಯಾಧಿಕಾರಿಗಳ ನೇತೃತ್ವದಲ್ಲಿ ಇಲ್ಲಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಪದವಿ ಪೂರ್ವ ಕಾಲೇಜು ಆವರಣದಲ್ಲಿ ವನಮಹೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಯಸಳೂರು ವಲಯದ ವಲಯ ಅರಣ್ಯಾಧಿಕಾರಿ ಶ್ರೀಜಗದೀಶ್ ಜಿ.ಆರ್. ಗಿಡ ನೆಡುವುದರ ಮೂಲಕ ನೆರವೇರಿಸಿದರು.
ಬಳಿಕ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು ಅರಣ್ಯ ರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ, ಮುಂದಿನ ಪೀಳಿಗೆಗೆ ಉತ್ತಮ ಆಮ್ಲಜನಕ, ಪರಿಸರ ಉಳಿಯಬೇಕಾದರೆ ಗಿಡಗಳನ್ನು ನೆಟ್ಟು ಅರಣ್ಯಗಳನ್ನು ಬೆಳೆಸಬೇಕೆಂದರು.
ಈ ಕಾರ್ಯಕ್ರಮದಲ್ಲಿ ಉಪ ವಲಯ ಅರಣ್ಯಾಧಿಕಾರಿ ಶ್ರೀ ವಿಜಯ ಕುಮಾರ್ ಜಿ.ಎಸ್, ಬೀಟ್ ಫಾರೆಸ್ಟ್ ಆಫೀಸರ್ ನವೀನ್, ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಂಶುಪಾಲ ಮಂಜುನಾಥ ಬಿ.ಡಿ., ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ವರ್ಗ, ಯಸಳೂರು ವಲಯದ ಅರಣ್ಯ ಇಲಾಖೆಯ ಸಿಬ್ಬಂದಿ ವರ್ಗ, ರೋವರ್ಸ್ ಮತ್ತು ರೇಂಜರ್ಸ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.




