
ಹೊಸದಿಲ್ಲಿ : ಒಡಿಶಾದ ಬಾಲಸೋರ್ ನಲ್ಲಿ ಜೂನ್ 2 ರಂದು ಸಂಭವಿಸಿದ್ದ ಮೂರು ರೈಲುಗಳ ಭೀಕರ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಶುಕ್ರವಾರ ಮೂವರು ರೈಲ್ವೆ ಸಿಬಂದಿಯನ್ನು ಕಸ್ಟಡಿಗೆ ತೆಗೆದುಕೊಂಡಿದ್ದು, ಪ್ರಕರಣದಲ್ಲಿ ಮೊದಲ ಬಂಧನವನ್ನು ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಾಲಸೋರ್ ಜಿಲ್ಲೆಯಲ್ಲಿ ನಿಯೋಜಿಸಲಾದ ಹಿರಿಯ ಸೆಕ್ಷನ್ ಇಂಜಿನಿಯರ್ (ಸಿಗ್ನಲ್) ಅರುಣ್ ಕುಮಾರ್ ಮಹಂತ, ಸೆಕ್ಷನ್ ಇಂಜಿನಿಯರ್ ಮೊಹಮ್ಮದ್ ಅಮೀರ್ ಖಾನ್ ಮತ್ತು ತಂತ್ರಜ್ಞ ಪಪ್ಪು ಕುಮಾರ್ ಅವರನ್ನು ಏಜೆನ್ಸಿ ಬಂಧಿಸಿದೆ. ಮೂವರನ್ನು ಐಪಿಸಿ ಸೆಕ್ಷನ್ 304 (ಕೊಲೆಗೆ ಸಮಾನವಲ್ಲದ ನರಹತ್ಯೆ ಅಪರಾಧ) ಮತ್ತು 201 (ಸಾಕ್ಷ್ಯ ನಾಶ) ಅಡಿಯಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ಬಜಾರ್ ನಿಲ್ದಾಣದ ಬಳಿ ಸಂಭವಿಸಿದ ಅಪಘಾತದಲ್ಲಿ 293 ಜನರು ಸಾವನ್ನಪ್ಪಿದ್ದರು. ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್ಪ್ರೆಸ್, ಬೆಂಗಳೂರು-ಹೌರಾ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ಮತ್ತು ಸ್ಟೇಷನರಿ ಗೂಡ್ಸ್ ರೈಲು ಗಳು ಅಪಘಾತಕ್ಕೆ ಗುರಿಯಾಗಿದ್ದವು.
