
ಹಾಸನ : ರಾಜ್ಯದಲ್ಲಿ ಯಾವುದೇ ಬಿಪಿಎಲ್ (BPL) ಕಾರ್ಡ್ ರದ್ದು ಮಾಡುವುದಿಲ್ಲ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ.
ಹಾಸನದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ‘ಯಾರು ಅರ್ಹರಿರುತ್ತಾರೋ ಅವರಿಗೆ ಪರಿಶೀಲನೆ ಮಾಡಿ ಬಿಪಿಎಲ್ ಕಾರ್ಡ್ ಕೊಡಲಿದ್ದೇವೆ, ಯಾವುದೇ ಬಿಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ.
ಕೆಲವರ ಬ್ಯಾಂಕ್ ಖಾತೆ ಇಲ್ಲದ ಕಾರಣ ಪಡಿತರ ಚೀಟಿ ರದ್ದಾಗಿತ್ತು. 3 ತಿಂಗಳಲ್ಲಿ ಅರ್ಹರಿಗೆ ಬಿಪಿಎಲ್, ಎಪಿಎಲ್ ಕಾರ್ಡ್ ವಿತರಿಸಲಿದ್ದೇವೆ’ ಎಂದು ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದ್ದಾರೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಿಪಿಎಲ್ ಕಾರ್ಡ್ ಗೆ 3 ಲಕ್ಷ ಅರ್ಜಿ ಬಂದಿದ್ದವು. ಅರ್ಜಿ ಬಗ್ಗೆ ಪರಿಶೀಲನೆ ಮಾಡಿ ಅನುಮೋದನೆ ನೀಡಲು ಸೂಚನೆ ನೀಡಲಾಗಿದೆ. ಎಲ್ಲವನ್ನೂ ಪರಿಶೀಲಿಸಿಯೇ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ವಿತರಣೆ ಮಾಡಲಿದ್ದೇವೆ, ಅರ್ಹ ಜನರಿಗೆ ಯಾವುದೇ ತೊಂದರೆ ಆಗಲ್ಲ . ಎಲ್ಲವನ್ನೂ ಪರಿಶೀಲನೆ ಮಾಡಿ ಅಕ್ಕಿ ವಿತರಣೆ ಮಾಡಲಿದ್ದೇವೆ ಎಂದು ಸಚಿವರು ಹೇಳಿದರು.
