
ಹಾಸನ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ನಿಂದ ರಾಜ್ಯದ ಎಲ್ಲಾ 28 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ನಿಲ್ಲಿಸಲಾಗುವುದು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು, ಎಲ್ಲಾ 28 ಕ್ಷೇತ್ರಗಳಲ್ಲಿ ನಾವು ಗೆದ್ದುಬಿಡ್ತಿವಿ ಅಂತ ನಾನು ಹೇಳಲ್ಲ.ನಾವು ನಾಲ್ಕೈದು ಸ್ಥಾನ ಗೆಲ್ಲುವ ಅವಕಾಶವಿದೆ.
ಮುಂದಿನ ದಿನಗಳಲ್ಲೂ ನಮ್ಮ ಪಕ್ಷದ ಕಾರ್ಯಕರ್ತರನ್ನು ನಾನು ಉಳಿಸಬೇಕು ಎಂದು ತಿಳಿಸಿದರು.
ಕಾರ್ಯಕರ್ತರನ್ನು ಉಳಿಸಿಕೊಳ್ಳಲು ಮತ್ತು ಮುಂದಿನ ವಿಧಾನಸಭಾ ಚುನಾವಣೆ ದೃಷ್ಟಿಯಿಂದ ನಾವು ನಮ್ಮ ಪಕ್ಷದ ಕಾರ್ಯಕರ್ತರಿಗೆ ಯಾವುದೇ ರೀತಿಯ ಸಮಸ್ಯೆಗಳು ಉದ್ಭವವಾಗಬಾರದು. ಆ ಕಾರಣಕ್ಕೆ 28 ಕ್ಷೇತ್ರಗಳಲ್ಲಿಯೂ ಸ್ಪರ್ಧಿಸುವ ಈ ನಿರ್ಧಾರ ಕೈಗೊಳ್ಳುತ್ತಿದ್ದೇವೆ ಎಂದು ಪ್ರಶ್ನೆಯೊಂದಕ್ಕೆ ಕುಮಾರಸ್ವಾಮಿ ಉತ್ತರಿಸಿದರು.
ಆಪರೇಷನ್ ಹಸ್ತದ ಮೂಲಕ ಹೆದರಿಸುವ ಕೆಲಸಆಪರೇಷನ್ ಹಸ್ತದ ಮೂಲಕ ಕಾಂಗ್ರೆಸ್ ನಾಯಕರು ಪ್ರತಿಪಕ್ಷಗಳನ್ನು ಹೆದರಿಸಿ ಬೆದರಿಸುವ ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ಸೊಪ್ಪು ಹಾಕುವ ಜಾಯಮಾನ ನಮ್ಮದಲ್ಲ ಎಂದು ಹೇಳಿದರು.
ಆಪರೇಷನ್ ಹಸ್ತ ಮಾಡುತ್ತಿರುವವರಿಗೆ ಈಗಾಗಲೇ ಹೇಳಿದ್ದೇನೆ. ನಮ್ಮ ಪಕ್ಷದಿಂದ ಯಾರಾದರೂ ಬರುವವರು ಇದ್ದರೆ ಮೈಸೂರು ಪೇಟ ಹಾಕಿ ಶಾಲು ಹೊದಿಸಿ ಕರೆದುಕೊಂಡು ಹೋಗಿ ಅಂದಿದ್ದೀನಿ ಎಂದು ಟಾಂಗ್ ನೀಡಿದರು.
